ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಹೋಗೋದಿಲ್ಲ- ಕಾಂಗ್ರೆಸ್ ಅಧಿಕೃತ ಘೋಷಣೆ…

52
firstsuddi

ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಿಂದ ಕಾಂಗ್ರೆಸ್ ಪಕ್ಷ ದೂರ ಉಳಿಯುವ ನಿರ್ಧಾರ ಮಾಡಿದೆ. ಈ ನಿರ್ಧಾರವನ್ನು ಕಾಂಗ್ರೆಸ್‍ನ ಅಧಿಕೃತ ಹೇಳಿಕೆಯ ಮೂಲಕ ತಿಳಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್, ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ಬಂದಿತ್ತು. ಆದರೆ ಗೌರವ ಪೂರ್ವಕವಾಗಿ ಕಾಂಗ್ರೆಸ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧರಿಸಿದೆ ಎಂದು ತಿಳಿಸಿದೆ.

ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ವಿಷಯವಾಗಿದ್ದು, ಆರ್‌ಎಸ್‌ಎಸ್ ಮತ್ತು ಬಿಜೆಪಿ ಅಯೋಧ್ಯೆಯಲ್ಲಿ ಮಂದಿರವನ್ನು ರಾಜಕೀಯಕ್ಕಾಗಿ ಹಿಂದಿನಿಂದಲೂ ಬಳಕೆ ಮಾಡುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರಿಂದ ಅಪೂರ್ಣ ದೇವಾಲಯದ ಉದ್ಘಾಟನೆ ಚುನಾವಣಾ ಲಾಭಕ್ಕಾಗಿ ಮಾಡುತ್ತಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

2019 ರ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವಾಗ, ಮಲ್ಲಿಕಾರ್ಜುನ ಖರ್ಗೆ, ಶ್ರೀಮತಿ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕ್ರಮದ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರುವ ಕಾಂಗ್ರೆಸ್ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ವಿಶ್ವ ಹಿಂದೂ ಪರಿಷತ್ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ಪಕ್ಷವು ಬಯಸದಿದ್ದರೆ ಅದು ಅವರ ಆಯ್ಕೆಯಾಗಿದೆ. ನಾವು ಆಹ್ವಾನವನ್ನು ಕಳುಹಿಸಿದ್ದೇವೆ, ಅವರು ಬರಲು ಬಯಸದಿದ್ದರೆ ಪರವಾಗಿಲ್ಲ ಎಂದು ವಿಹೆಚ್‍ಪಿ ಮೂಲಗಳು ತಿಳಿಸಿವೆ.