ದಕ್ಷಿಣ ಕನ್ನಡ : ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಕೊಣಾಜೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರಿಗೆ ಚೂರಿಯಿಂದ ಇರಿದು ಆರೋಪಿ ಪರಾರಿಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾನ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ಹಲ್ಲೆಯಿಂದ ಗಾಯಗೊಂಡಿರುವ ಎಸ್ಐ ಶರಣಪ್ಪ ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಲೆಬಾಳುವ ವಾಚ್ ಕಳ್ಳತನದ ಆರೋಪಿಯು ಪಾವೂರಿನಲ್ಲಿರುವ ಅವನ ಅತ್ತೆ ಮನೆಯಲ್ಲಿ ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆತ ಎಸ್ಐ ಶರಣಪ್ಪ ಅವರ ಮೇಲೆ ಚೂರಿಯಿಂದ ಇರಿದಿದ್ದಾನೆ.
ಆರೋಪಿಯೂ ಈ ಹಿಂದೆ ಕೂಡ ಬಂದರು ಠಾಣಾ ವ್ಯಾಪ್ತಿಯಲ್ಲಿ ಕಳವು ಕೃತ್ಯ ಸಂದರ್ಭದಲ್ಲಿ ಹಿಡಿಯಲು ಹೋದಾಗ ಪೊಲೀಸ್ ಸಿಬ್ಬಂದಿ ವಿನೋದ್ ಮತ್ತು ಪ್ರವೀಣ್ ಎಂಬುವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಸದ್ಯ ಕೊಣಾಜೆ ಠಾಣಾ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.










