ಚಿಕ್ಕಮಗಳೂರು : ಮಲೆನಾಡು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ ಹಾಗೂ ಕೊಪ್ಪ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಜನರು ಮನೆಯಿಂದ ಹೊರಗೆ ಬರದಂತ ಸ್ಥಿತಿ ನಿರ್ಮಾಣವಾಗಿದೆ.
ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಪ್ಪ ತಾಲ್ಲೂಕಿನ ಹೇರೂರು ಸಮೀಪದ ದೇವಗೋಡು ಗ್ರಾಮದ ರತ್ನಮ್ಮ-ನಾಗಪ್ಪಗೌಡ ಎಂಬುವವರ ಮನೆ ಕುಸಿದು ಬಿದ್ದಿದ್ದು, ಲಕ್ಷಾಂತರ ರೂ. ನಷ್ಠವುಂಟಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್, ಜಾವಳಿ, ಬಾಳೂರು, ದಾರದಹಳ್ಳಿ, ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜೀವ ನದಿಗಳಾದ ಹೇಮಾವತಿ, ತುಂಗಾ-ಭದ್ರಾ ನದಿಗಳು ಮೈದುಂಬಿ ಹರಿಯುತ್ತಿವೆ.











