ನವದೆಹಲಿ : ಪ್ರತಿಷ್ಠಿತ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಿನ್ನೆ ನಡೆದ ಹಿಂಸಾಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಗೂಂಡಾಗಳು ಕಾರಣ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರು ಹೇಳಿದ್ದಾರೆ. ನಿನ್ನೆ ರಾತ್ರಿ ದೆಹಲಿಯ ಜೆಎನ್ಯು ಕ್ಯಂಪಸ್ ಒಳಗೆ ಕೆಲವು ಮುಸುಕುಧಾರಿಗಳು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಕ್ಯಾಂಪಸ್ನ ಆಸ್ತಿ ಪಾಸ್ತಿಗೆ ಹಾನಿಯಾಗಿದ್ದು, ಗಾಯಗೊಂಡಿರುವ 18ಮಂದಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಪ್ರಿಯಾಂಕ ಗಾಂಧಿ ಅವರು, ಮೋದಿ ಮತ್ತು ಅಮಿತ್ ಶಾ ಅವರು ವಿದ್ಯಾರ್ಥಿಗಳಲ್ಲಿ ಭಯ ಮೂಡಿಸುತ್ತಿದ್ದಾರೆ. ಮೋದಿ ಹಾಗೂ ಅಮಿತ್ ಶಾ ಅವರಿಂದಲೆ ಈ ಗಲಾಟೆ ನಡೆದಿದ್ದು, ಅವರು ಏಕೆ ಮೌನವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ವಿಶ್ವವಿದ್ಯಾಲಯಗಳ ಮೂಲಕ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಗೂಂಡಾಗಳು ಈ ಭೀತಿಯನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.










