ಮಂಡ್ಯ : ಜಿಲ್ಲೆಯಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಮಾಡುವ ತೊರೆಕಾಡನಹಳ್ಳಿ (ಟಿ.ಕೆ. ಹಳ್ಳಿ) ಪಂಪ್ ಸ್ಟೇಷನ್ ಜಲಾವೃತವಾಗಿದ್ದು, ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಈ ಕುರಿತು ಜಲ ಮಂಡಳಿ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಮಂಡ್ಯ ಜಿಲ್ಲೆಯ ಹಲಗೂರಿನಲ್ಲಿ ಧಾರಾಕಾರ ಮಳೆ ಸುರಿದಿರುವ ಹಿನ್ನೆಲೆಯಲ್ಲಿ ಮಳವಳ್ಳಿ ತಾಲ್ಲೂಕು ಟಿ.ಕೆ.ಹಳ್ಳಿಯಲ್ಲಿರುವ ಕಾವೇರಿ ನೀರಿನ ಜಲರೇಚಕ ಯಂತ್ರಾಗಾರ (ಪಂಪ್ ಸ್ಟೇಷನ್) ಜಲಾವೃತಗೊಂಡಿದ್ದು, ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಏರುಪೇರಾಗಲಿದೆ. ಇಂದು ಮತ್ತು ನಾಳೆ ಅಂದರೆ ಸೆಪ್ಟೆಂಬರ್ 5 ಮತ್ತು 6ರಂದು ಸಿಲಿಕಾನ್ ಸಿಟಿಗೆ ಸರಬರಾಜಾಗುತ್ತಿದ್ದ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ಮಂಡ್ಯಕ್ಕೆ ತೆರಳಲಿದ್ದು, ಟಿಕೆ ಹಳ್ಳಿಯಲ್ಲಿರುವ ಬೆಂಗಳೂರು ನೀರು ಸರಬರಾಜು ಮಂಡಳಿಯ ಘಟಕಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.










