ರಾಮನಗರ: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅದರಂತೆ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಿಂದ ಎನ್ಡಿಎ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವ ಮೊದಲು ರಾಮನಗರಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮನಸ್ಸು ಮತ್ತು ಹೃದಯಗಳು ಒಂದಾಗಿವೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಾರು 6.75 ಲಕ್ಷ ಮತ ಗಳಿಸಿದ ಶಾಸಕ ಡಾ ಅಶ್ವಥ್ ನಾರಾಯಣ ಅವರೊಂದಿಗೆ ಎಲ್ಲ 8 ವಿಧಾನಸಭಾಅ ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ, ಎಲ್ಲ ಕಡೆ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಮೊನ್ನೆ ಪಕ್ಷದ ವರಿಷ್ಠರಾದ ಅಮಿತ್ ಶಾ ಅವರು ಚನ್ನಪಟ್ಟಣದಲ್ಲಿ ನಡೆಸಿದ ರೋಡ್ ಶೋ ಅಭೂತಪೂರ್ವ ಯಶ ಕಂಡಿದೆ, ಹೀಗಾಗಿ ದಿನೇದಿನೆ ತಮ್ಮ ಆತ್ಮವಿಶ್ವಾಸ ಹೆಚ್ಚುತ್ತಿದೆ ಎಂದು ಅವರು ಹೇಳಿದರು.
ಡಿಕೆ ಸಹೋದರರು ಮಾಡುವ ಕಾಮೆಂಟ್ ಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಮಂಜುನಾಥ್ ಅದಕ್ಕೆಲ್ಲ ಮತದಾರರೇ ಉತ್ತರ ನೀಡುತ್ತಾರೆ ಎಂದರು.










