ಮಂಡ್ಯ : ಚಿನ್ನದ ಆಸೆಗಾಗಿ ದುಷ್ಕರ್ಮಿಗಳು ಡ್ರಾಗರ್ ನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು , ಮೃತ ವ್ಯಕ್ತಿಯನ್ನು ಮಧು (30) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.
ನಿನ್ನೆ ರಾತ್ರಿ ಮಧು ಅವರು ಸ್ನೇಹಿತರೊಂದಿಗೆ ರಸ್ತೆ ಬದಿಯಲ್ಲಿ ನಿಂತುಕೊಂಡು ಮಾತನಾಡುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಡ್ರಾಗರ್ ನಿಂದ ಹೊಟ್ಟೆಯ ಭಾಗಕ್ಕೆ ಚುಚ್ಚಿ ಬಳಿಕ ಅವರ ಮೈ ಮೇಲೆ ಇದ್ದ ಚಿನ್ನಾಭರಣಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ತಕ್ಷಣವೇ ಮಧು ಅವರನ್ನು ಮಳವಳ್ಳಿಯ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯದಲ್ಲೇ ಮಧು ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










