ನವದೆಹಲಿ : ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನಿಂದ ಬೆಳಿಗ್ಗೆ 5.30ಕ್ಕೆ ತಮ್ಮ ಕೆಲವು ಬೆಂಬಲಿಗರೊಂದಿಗೆ ವಿಮಾನದಲ್ಲಿ ಹೊರಟ ವಿಜಯೇಂದ್ರ ಅವರು 8 ಗಂಟೆಗೆ ದೆಹಲಿ ತಲುಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚೆಗೆ ಸಚಿವ ಸಿ.ಪಿ ಯೋಗೀಶ್ವರ್ ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದಾದ, ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಇದೀಗ ವಿಜಯೇಂದ್ರ ಅವರ ಈ ದಿಢೀರ್ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಮೂಲಗಳ ಪ್ರಕಾರ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲು ವಿಜಯೇಂದ್ರ ತೆರಳಿದ್ದಾರೆ ಎನ್ನಲಾಗುತ್ತಿದೆ.










