ನಟ ದರ್ಶನ್ ಹಾಗೂ ಇತರ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ಮುಂದೂಡಿಕೆ.

37

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳಿಗೆ ಸೆಪ್ಟೆಂಬರ್ 17 ರ ವರೆಗೆ ನ್ಯಾಯಾಂಗಬಂಧನದ ಅವಧಿಯನ್ನು 24ನೇ ಎಸಿಎಂಎಂ ನ್ಯಾಯಾಲಯ ವಿಸ್ತರಿಸಿದೆ.
ಬಳ್ಳಾರಿ ಜೈಲಿನಿಂದ ದರ್ಶನ್, ಪರಪ್ಪನ ಅಗ್ರಹಾಹ ಜೈಲಿನಿಂದ ಪವಿತ್ರಾಗೌಡ, ದೀಪಕ್, ತುಮಕೂರು ಜೈಲಿನಿಂದ ಅನುಕುಮಾರ್, ಜಗದೀಶ್ ಹಾಗೂ ರವಿ ಸೇರಿದಂತೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದ ವಿವಿಧ ಕಾರಾಗೃಹದಲ್ಲಿರುವ 17 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದರು. ಹಾಜರಾಗುತ್ತಿದ್ದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಸರತಿಯಂತೆ ಆರೋಪಿಗಳ ಹೆಸರು ಕೂಗಿ ಇರುವಿಕೆ ಬಗ್ಗೆ ಖಚಿತಪಡಿಸಿಕೊಂಡರು.
ಆರೋಪಿಗಳ ಪರ ವಕೀಲರು ವಾದ ಮಂಡಿಸಿ ಸಂಪೂರ್ಣ ಚಾರ್ಜ್ ಶೀಟ್ ಒದಗಿಸಿಲ್ಲ. ಡಿಜಿಟಲ್ ಎವಿಡೆನ್ಸ್ ಸಹ ಪೊಲೀಸರು ನೀಡಿಲ್ಲ ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್‍ಪಿಪಿ 164 ಅಡಿ ಹೇಳಿಕೆ ನೀಡಿದ ಪ್ರಮಾಣೀಕೃತ ದಾಖಲಾತಿ ನೀಡಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು. ಎಸ್‍ಪಿಪಿ ಪರ ವಕೀಲ ಪ್ರಸನ್ನ ಕುಮಾರ್ ಮುಂದಿನ ವಾರ ಡಿಜಿಟಲ್ ಎವಿಡೆನ್ಸ್ ಗಳನ್ನು ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದೇ ವೇಳೆ, ಟೆಕ್ನಿಕಲ್ ಎವಿಡೆನ್ಸ್ ನೀಡಿದ ಬಳಿಕ ಸೆಷನ್ಸ್ ಕೋರ್ಟ್‍ಗೆ ವರ್ಗಾಯಿಸುವಂತೆ ಆರೋಪಿಗಳ ಪರ ವಕೀಲರು ಮನವಿ ಮಾಡಿದರು.. ಆಗ ಸಾಕ್ಷ್ಯ ಸಲ್ಲಿಸಿದ ಬಳಿಕವೇ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲಾಗುವುದು ಎಂದು ಹೇಳಿದ ನ್ಯಾಯಾಧೀಶರು ಸೆಪ್ಟೆಂಬರ್ 17ರವರೆಗೆ ಬಂಧನ ಅವಧಿವನ್ನು ವಿಸ್ತರಿಸಿ ಆದೇಶಿಸಿದರು.