ಬೆಂಗಳೂರು : ಆತ್ಮಹತ್ಯೆಗೆ ಶರಣಾದ ಉದ್ಯಮಿ ಕಗ್ಗಲಿಪುರದ ಪ್ರದೀಪ್ ನಿವಾಸಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಸೇರಿದಂತೆ ಕಾಂಗ್ರೆಸ್ ನಾಯಕರು ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಭೇಟಿ ಬಳಿಕ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಈ ಘಟನೆಯಿಂದ ಪ್ರದೀಪ್ ಕುಟುಂಬಕ್ಕೆ ತೀವ್ರ ನೋವುಂಟು ಮಾಡಿದೆ. ದುರಂತ ಅಂತ್ಯವಾಗಿರುವ ಪ್ರದೀಪ್ ಕುಟುಂಬದ ದುಃಖ ಹಂಚಿಕೊಳ್ಳಲು ಬಂದಿದ್ದೇವೆ. ಅತಿರೇಕದ ನಿರ್ಧಾರವನ್ನು ಪ್ರದೀಪ್ ತೆಗೆದುಕೊಂಡಿದ್ದಾರೆ ಎಂದರು.
ಸಂತೋಷ್ ಪಾಟೀಲ್, ಪ್ರದೀಪ್, ಪ್ರಸಾದ್ ಇವೆಲ್ಲ ಕೇವಲ ಹೆಸರುಗಳಲ್ಲ. ಭ್ರಷ್ಟ ಸರ್ಕಾರದಿಂದ ಆಗುತ್ತಿರುವ ಸಾವುಗಳು. 40% ಕಮಿಷನ್ ನಿಂದ ಜೀವದ ಮೇಲೆ ಜೀವ ಬಲಿಯಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಂತೋಷ್ ಪಾಟೀಲ್ ಕೂಡ ಬಿಜೆಪಿ ಲೀಡರ್ ಆಗಿದ್ದ ಅವನಿಗೂ ಹಣಕಾಸಿನ ಸಮಸ್ಯೆ ಆಗಿತ್ತು. ಪ್ರಸಾದ್ ಸಾವಿಗೂ ಹಣಕಾಸಿನ ಸಮಸ್ಯೆಯೇ ಕಾರಣವಾಗಿತ್ತು. ಬಿಜೆಪಿ ನಾಯಕರು ಯಾಕೆ ಹಣಕಾಸಿನ ವ್ಯವಹಾರಗಳಲ್ಲಿ ತಲೆ ಹಾಕ್ತಿದ್ದಾರೆ? ಎಂದು ಪ್ರಶ್ನಿಸಿದರು.
ಪ್ರದೀಪ್ ಸಾವು ಆತ್ಮ ಹತ್ಯೆ ಅಲ್ಲ, ಅದೊಂದು ಕೊಲೆ. ಇವರ ಮಗಳ, ಹೆಂಡತಿಯ ಕಣ್ಣೀರು ಒರೆಸುವುದಕ್ಕೆ ಸರ್ಕಾರದ ಕೈಯಲ್ಲಿ ಸಾಧ್ಯ ಇದೆಯಾ? ಭ್ರಷ್ಟಾಚಾರದಿಂದಾಗಿಯೇ ಇದೆಲ್ಲ ಆಗ್ತಾ ಇದೆ. ಪ್ರದೀಪ್ ಕೊಲೆಗೆ ಕಾರಣ ಆದವರಿಗೆ ಸರ್ಕಾರ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದರು.










