ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ- ಸಿಎಂ ಸಂತಾಪ…

48
firstsuddi

ಉಡುಪಿ: ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ (67) ಇಂದು ಬೆಳಗಿನ ಜಾವ ಪುತ್ರನ ಮನೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ನಾಲ್ಕೂವರೆ ದಶಕಗಳಿಗೂ ಹೆಚ್ಚುಕಾಲ ಯಕ್ಷಗಾನ ಕ್ಷೇತ್ರಕ್ಕೆ ದುಡಿದಿರುವ ಧಾರೇಶ್ವರರು ತಮ್ಮ ವಿಶಿಷ್ಠ ಕಂಠದ ಮೂಲಕ ಯಕ್ಷಾಭಿಮಾನಿಗಳಿಗೆ ಮೋಡಿ ಮಾಡಿದ್ದರು.

ಪೆರ್ಡೂರು ಮೇಳದಲ್ಲಿ ಸುದೀರ್ಘ 28 ವರ್ಷಗಳ ಕಾಲ ಭಾಗವತರಾಗಿದ್ದರು. ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ, ಶಿರಸಿ ಮೇಳದಲ್ಲೂ ಭಾಗವತರಾಗಿದ್ದರು.

ಯಕ್ಷಗಾನದಲ್ಲಿ ಸಾಂಪ್ರದಾಯಿಕ ರಾಗಗಳ ಜತೆಗೆ ಹೊಸ ರಾಗಗಳ ಬಳಸಿ ಯಶಸ್ವಿಯಾಗಿದ್ದ ಧಾರೇಶ್ವರರು 400ಕ್ಕೂ ಆಧಿಕ ಯಕ್ಷಗಾನದ ಕ್ಯಾಸೆಟ್‌ಗಳಿಗೆ ಧನಿಯಾಗಿದ್ದರು. 300ಕ್ಕೂ ಅಧಿಕ ಪೌರಾಣಿಕ, ಸಾಮಾಜಿಕ, ಐತಿಹಾಸಿಕ ಪ್ರಸಂಗಗಳನ್ನು ನಿರ್ದೇಶಿಸಿದ್ದರು.

ಸುಬ್ರಹ್ಮಣ್ಯ ಧಾರೇಶ್ವರ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಗಾನ ಮಾಂತ್ರಿಕ, ಕರಾವಳಿ ಭಾಗದ ಸುಪ್ರಸಿದ್ಧ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರರ ನಿಧನದ ಸುದ್ದಿ ನೋವುಂಟು ಮಾಡಿದೆ. ಸುದೀರ್ಘ 45 ವರ್ಷಗಳ ಕಾಲ ತಮ್ಮ ಕಂಠಸಿರಿಯ ಮೂಲಕ ಕಲಾರಸಿಕರನ್ನು ರಂಜಿಸಿದ್ದ ಧಾರೇಶ್ವರರು ಪ್ರಯೋಗಶೀಲ ಭಾಗವತಿಕೆಗೆ ಹೆಸರುವಾಸಿಯಾದವರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.