ಬೆಂಗಳೂರು : ಮೈತ್ರಿ ಸರ್ಕಾರ ಪತನವಾಗಲು ಕಾರಣರಾದ 17ಮಂದಿ ಅನರ್ಹ ಶಾಸಕರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನರ್ಹ ಶಾಸಕರಿಗೆ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹಾಗೂ ರಾಜ್ಯ ಉಸ್ತುವಾರಿ ಸಚಿವ ಮುರುಳೀಧರ್ ರಾವ್ ಅವರು ಪಕ್ಷಕ್ಕೆ ಸ್ವಾಗತಿಸಿದರು. ಇಂದು ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ, ಎಚ್. ವಿಶ್ವನಾಥ್, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಶಿವರಾಂ ಹೆಬ್ಬಾರ್, ಬಿಸಿ ಪಾಟೀಲ್, ಆನಂದ್ ಸಿಂಗ್, ಡಾ.ಸುಧಾಕರ್, ಬೈರತಿ ಬಸವರಾಜ್, ಎಸ್ಟಿ ಸೋಮಶೇಖರ್, ಮುನಿರತ್ನ ಅವರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದರು.










