ಬೆಳಗಾವಿ ಅಧಿವೇಶನದಲ್ಲಿ ಶಾಸಕರ, ಸಚಿವರ ಹಾಜರಾತಿ ಕಡ್ಡಾಯ : ಸ್ಪೀಕರ್ ಕಾಗೇರಿ.

52
firstsuddi

ಬೆಳಗಾವಿ : ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಶಾಸಕರ, ಸಚಿವರ ಹಾಜರಾತಿ ಕಡ್ಡಾಯಕ್ಕೆ ಕ್ರಮ ವಹಿಸಲಾಗಿದೆ. ಅಧಿವೇಶನಕ್ಕೆ ಹೋಗಲ್ಲ, ಅಲ್ಲೇನಿದೆ ಎಂಬ ಶಾಸಕರ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು. ನಾನು ಅದನ್ನು ಸಹಿಸುವುದಿಲ್ಲ. ಗೈರಾಗುವುದಾದರೆ ಪೂರ್ವ ಅನುಮತಿ ಪಡೆಯುವುದು ಕಡ್ಡಾಯ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಅಧಿವೇಶನದಲ್ಲಿ 6 ವಿಧೇಯಕ ಮಂಡನೆಗೆ ಸರ್ಕಾರ ನಿರ್ಧಾರ ಮಾಡಿದೆ. ಬೆಂಗಳೂರು ಭೂಸುಧಾರಣೆ ಕಾಯ್ದೆ, ಕನ್ನಡ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆಯಾಗಿವೆ. ಚಳಿಗಾಲದ ಅಧಿವೇಶನ ವೇಳೆ ಚರ್ಚೆ ಮಾಡಿ, ಅಂಗೀಕಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಇದಲ್ಲದೇ ಈ ಬಾರಿ ನಡೆಯುವ ಗಡಿಪ್ರದೇಶ ಅಭಿವೃದ್ಧಿ ವಿಧೇಯಕ ಸೇರಿ 6 ಮಸೂದೆಗಳನ್ನು ಮಂಡಿಸಲಾಗುವುದು ಎಂದರು.

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ವಿಶೇಷ ಆದ್ಯತೆ ನೀಡಲಾಗುವುದು. ಈ ಸಲವೂ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಿದ್ದೇವೆ. ಪ್ರಶಸ್ತಿ ಪ್ರದಾನ ದಿನಾಂಕ, ಶಾಸಕರ ಹೆಸರು ಇನ್ನೂ ಅಂತಿಮವಾಗಿಲ್ಲ. ಅಧಿವೇಶನಕ್ಕೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಚ್ಚುಕಟ್ಟಾಗಿ ಅಧಿವೇಶನ ನಡೆಸಲು ಸೂಚನೆ ಕೊಟ್ಟಿದ್ದೇನೆ. ಸಚಿವರು-ಶಾಸಕರು, ಅಧಿಕಾರಿಗಳ ವಸತಿ, ಊಟ, ವಾಹನದ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲು ಸೂಚಿಸಿದ್ದೇನೆ ಎಂದು ಹೇಳಿದರು.

ಬೆಳಗಾವಿಯಲ್ಲಿ ಈ ಸರ್ಕಾರದ ಕೊನೆಯ ಅಧಿವೇಶನವಾಗಿದಕ್ಕೆ ಹೆಚ್ಚು ಪ್ರಾಮುಖ್ಯತೆ ಪಡೆದಿದೆ. ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು, ಉಭಯ ಸದನದ ಕಲಾಪಗಳು ಮುಕ್ತವಾಗಿ ನಡೆಯಲಿವೆ. ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರಿಗೂ ಮುಕ್ತ ಅವಕಾಶ ನೀಡಲಾಗುವುದು ಎಂದರು.