ಬೆಂಗಳೂರು : ಮಳೆಗಾಲ ಸಮೀಪಿಸುತ್ತಿದ್ದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸೂಚನೆ ನೀಡಿರುವುದರ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ. ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದೇನೆ.ಕಳೆದ ವರ್ಷ ಕೊಡಗು ಸೇರಿದಂತೆ ಮಲೆನಾಡು,ಕರಾವಳಿ ಭಾಗಗಳಲ್ಲಿ ಭಾರಿ ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಈ ಬಾರಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜನಪ್ರತಿಧಿಗಳು ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವಕಾಶ ಇಲ್ಲದ ಕಾರಣ ಮುಖ್ಯ ಕಾರ್ಯದರ್ಶಿಗಳು ಅಧಿಕಾರಿಗಳ ತಂಡ ರಚಿಸಿ ಈ ಜಿಲ್ಲೆಗಳಲ್ಲಿ ಮುಂಗಾರಿನ ಪೂರ್ವಸಿದ್ಧತೆಯನ್ನು ಪರಿಶೀಲಿಸುವಂತೆ ತಿಳಿಸಿದ್ದೇನೆ. ಅಲ್ಲದೆ ಕೊಡಗು ಜಿಲ್ಲೆಯಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಅನಾಹುತಗಳ ಹಿನ್ನೆಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಮೂಲಸೌಕರ್ಯ ಅಭಿವೃದ್ಧಿ, ದುರಸ್ತಿ ಹಾಗೂ ಪುನರ್ವಸತಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವನ್ನು ಖಾತರಿ ಪಡಿಸಿಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. 












