ಬೆಂಗಳೂರು : ನಗರದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಮಹಾ ಮಳೆಗೆ ರಸ್ತೆ ಕಾಣದೇ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಏರ್ ಪೋರ್ಟ್ ರೋಡ್ ನ ಬೆಟ್ಟಹಲಸೂರು ಕ್ರಾಸ್ ಬಳಿ ನಡೆದಿದೆ.
ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಕಾರು ದೇವನಹಳ್ಳಿ ಕಡೆಯಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಮಳೆಯಿಂದಾಗಿ ರಸ್ತೆ ಕಾಣದೇ ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಕಾರು ಬಿದ್ದಿದೆ. ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಮಳೆ ಹಿನ್ನೆಲೆ ಕಾರಿನಲ್ಲಿದ್ದ ಮೃತದೇಹಗಳನ್ನು ತೆಗೆಯಲು ಹರಸಾಹಸಪಟ್ಟರು. ಚಿಕ್ಕಜಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










