ಮೋದಿಜಿ ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸಿ, ದೇಶದ ಘನತೆ ಮತ್ತು ಅದರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ: ಸೋನಿಯಾ ಗಾಂಧಿ.

47
firstsuddi

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸಿ, ದೇಶ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜೈಪುರದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರುವಂತೆ ವಿರೋಧ ಪಕ್ಷದ ನಾಯಕರನ್ನು ಒತ್ತಾಯಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇಂದು ನಮ್ಮ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ನಮ್ಮ ಸಂವಿಧಾನವನ್ನು ಬದಲಾಯಿಸಲು ಪಿತೂರಿ ನಡೆಸಲಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ, ಹಣದುಬ್ಬರ, ಅಸಮಾನತೆ, ದೌರ್ಜನ್ಯ ಹೆಚ್ಚಾಗಿದೆ. ಮೋದಿ ಸರ್ಕಾರ ಏನು ಮಾಡಿದೆ ಎಂಬುದು ನಮ್ಮೆಲ್ಲರ ಮುಂದೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಇತರ ನಾಯಕರು ಜೈಪುರದಲ್ಲಿ ತನ್ನ ಚುನಾವಣಾ ಪ್ರಣಾಳಿಕೆ ‘ನ್ಯಾಯ ಪತ್ರ’ವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ರ‍್ಯಾಲಿ ನಡೆಸಿದರು.