ಹುಬ್ಬಳ್ಳಿ : ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದ್ದು, ಸಿಎಎ, ಎನ್ಆರ್ಸಿ ವಿರೋಧಿಗಳು ಅಮಿತ್ ಶಾ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಅವರು ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಅಮಿತ್ ಶಾ ಅವರು ಆಗಮಿಸುವುದಕ್ಕೂ ಮೊದಲೇ ಸಿಎಎ, ಎನ್ಆರ್ಸಿ ವಿರೋಧಿಗಳು ಕಪ್ಪು ಬಟ್ಟೆ ಧರಿಸಿಕೊಂಡು ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಅಲ್ಲದೇ ಗ್ಯಾಸ್ ತುಂಬಿದ ಕಪ್ಪು ಬಲೂನ್ಗಳನ್ನು ಮೇಲಕ್ಕೆ ಹಾರಿಸಿದ್ದಾರೆ. ಸದ್ಯ ಪ್ರತಿಭಟನೆ ನಡೆಸುತ್ತಿದ್ದ 80ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.










