ಬೆಂಗಳೂರು: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ಹೈಕೋರ್ಟ್ ಇಂದು ರದ್ದುಪಡಿಸಿ ಆದೇಶಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ರಾಹುಲ್ ಗಾಂಧಿ ವಿದೇಶದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಅರ್ಜಿದಾರರು ಹೇಳಿಕೆ ನೀಡಿದ್ದಾರೆ. ಆದರೆ, ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್ಐಆರ್ನಲ್ಲಿರುವ ಯಾವುದೇ ಆರೋಪ ಸಂಬಂಧಿತ ಅಂಶಗಳು ಇಲ್ಲ. ನಮ್ಮ ಕಕ್ಷಿದಾರರ ಹೇಳಿಕೆಗೆ ಸಂಬಂಧಿಸಿದಂತೆ ಅಸಮಾಧಾನವಾಗಿದ್ದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಬಹುದಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಲಾಗುವುದು” ಎಂದು ಪೀಠಕ್ಕೆ ವಿವರಿಸಿದರು. ದೂರುದಾರ ಪರ ವಾದ ಮಂಡಿಸಿದ ವಕೀಲ ಸಂಕೇತ್ KtV, ಆರೋಪಕ್ಕೆ ಸಂಬಂಧಿಸಿದಂತೆ ಎಲ್ಲ ಅಂಶಗಳನ್ನು ಎಫ್ಐಆರ್ನಲ್ಲಿ ವಿವರಿಸಿಲ್ಲ. ಆದರೆ, ಅರ್ಜಿದಾರರ ಹೇಳಿಕೆಗಳು ಮಹಿಳೆಯ ಘನತೆಗೆ ಧಕ್ಕೆ ಮಾಡುವಂಥದ್ದು. ರಾಹುಲ್ ಗಾಂಧಿ ಅವರ ತಾಯಿಯ ನಡತೆ ಕುರಿತಂತೆ ಮಾತನಾಡಿದ್ದಾರೆ. ಈ ಹೇಳಿಕೆಯಿಂದಲೂ ಮಹಿಳೆಯ ಘನತೆಗೆ ಧಕ್ಕೆಯಾಗುತ್ತದೆ ಎಂದು ಪೀಠಕ್ಕೆ ತಿಳಿಸಿದರು. ಅರ್ಜಿದಾರರು, ಸಾಮಾನ್ಯ ವ್ಯಕ್ತಿಯಲ್ಲ. ಸುಶಿಕ್ಷಿತರು. ಸಂಸದರು, ಶಾಸಕರು ಕೇಂದ್ರ ಸಚಿವರೂ ಆಗಿದ್ದಾರೆ. ಈ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಎಫ್ಐಆರ್ ರದ್ದು ಮಾಡಬಾರದು. ತನಿಖೆ ನಡೆಸಿದಲ್ಲಿ ಸತ್ಯಾಂಶಗಳು ಹೊರಬರಲಿದೆ ಎಂದು ಕೋರಿದರು.