ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಲ್ಲ : ನಿಯಮ ತೆಗೆದುಹಾಕಿದ ಕೆಇಆರ್​ಸಿ.

73
firstsuddi

ಬೆಂಗಳೂರು : ವಿದ್ಯುತ್ ಸಂಪರ್ಕ ಪಡೆಯಲು ಒಸಿ ನಿಯಮವನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್​ಸಿ) ತೆಗೆದು ಹಾಕಿದ್ದು, ಇನ್ನು ಮುಂದೆ ವಿದ್ಯುತ್ ಸಂಪರ್ಕಕ್ಕಾಗಿ ಒಸಿ ಅಗತ್ಯ ಇಲ್ಲ ಎಂದು ತಿಳಿಸಿದೆ.

ಈ ಕುರಿತಾಗಿ ಇಂಧನ ಸಚಿವ ವಿ. ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದು, ಕಟ್ಟಡಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ನಿರಾಕ್ಷೇಪಣಾ ಪತ್ರ (ಓಸಿ) ಇಲ್ಲ ಎಂಬ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಣೆ ಇನ್ನು ಸಾಧ್ಯವಿಲ್ಲ. ಕಾಂಗ್ರೆಸ್ ಕಾಲದ ಈ ‘ಕತ್ತಲೆಭಾಗ್ಯದ’ ನಿಯಮವನ್ನು ಕೊನೆಗೂ ನಿವಾರಿಸಿದ್ದೇವೆ. ನಿಯಮ ಬದಲಾಯಿಸಿ KREC ಹೊರಡಿಸಿದ್ದ ಆದೇಶ ಇಂದಿನಿಂದಲೇ ರಾಜ್ಯಪತ್ರದ ಮೂಲಕ ಜಾರಿಗೆ ಬರುತ್ತಿದೆ. ಸರ್ವರಿಗೂ ಬೆಳಕು ಎಂಬ ನಮ್ಮ ಧ್ಯೇಯವಾಕ್ಯಕ್ಕೆ ಇನ್ನು ಯಾವುದೇ ಅಡ್ಡಿ ಇಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು ಐದು ಲಕ್ಷ ಕುಟುಂಬಗಳಿಗೆ ಇದು ಅನುಕೂಲವಾಗಲಿದೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಈ ಕತ್ತಲೆ ಭಾಗ್ಯದ ಕಾನೂನನ್ನು ಜಾರಿಗೆ ಬಂದಿದ್ದು, ನಮ್ಮ ಸರಕಾರ ಅದನ್ನು ಬದಲಾಯಿಸಿದೆ. ಎಲ್ಲರ ಮನೆಯಲ್ಲೂ ಬೆಳಕು ಮೂಡಲಿದೆ ಎಂದು ಟ್ವಿಟ್ ಮೂಲಕ ಹೊಸ ಆದೇಶದ ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ಐದು ವರ್ಷಗಳಿಂದ ಈ ಸಮಸ್ಯೆ ಬೆಂಗಳೂರಿನ ನಾಗರಿಕರನ್ನು ಕಾಡುತ್ತಿದ್ದು, ಬಿಬಿಎಂಪಿ ಹಾಗೂ ಇಂಧನ ಇಲಾಖೆಯ ಈ ಧೋರಣೆ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಬಿಜೆಪಿಯ ಬೆಂಗಳೂರು ಶಾಸಕರು ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ನಿಯಮ ಬದಲಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆಗೆ ಕ್ರಮ ಕೈಗೊಳ್ಳುವಂತೆ ಸುನೀಲ್ ಕುಮಾರ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿದ್ದರು. ನಂತರ ಕೆಇಆರ್ ಸಿಗೆ ಪತ್ರ ಬರೆಯಲಾಗಿತ್ತು. ಈ ಬಗ್ಗೆ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಆಯೋಗ ಹೊರಡಿಸಿದ ಆದೇಶ ಈಗ ರಾಜ್ಯಪತ್ರದ ಮೂಲಕ ಅಧಿಕೃತಗೊಂಡಿದೆ. ಇನ್ಮುಂದೆ ಅರ್ಜಿದಾರರು ಗುರುತು ಪ್ರಮಾಣಪತ್ರ, ಮನೆ ಮಾಲೀಕತ್ವದ ಪ್ರಮಾಣ ಪತ್ರ ಸಲ್ಲಿಸಿದರೆ ಸಾಕು.