ವಿವಾದಾತ್ಮಕ ಹೇಳಿಕೆ ನೀಡಬೇಡಿ, ಪ್ರತಿಪಕ್ಷಗಳ ಹೇಳಿಕೆಗಳಿಂದ ಯಾರೂ ಪ್ರಚೋದನೆಗೆ ಒಳಗಾಗಬಾರದು: ಮೋದಿ ಸಲಹೆ.

42
firstsuddi

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಮಹತ್ವದ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಭಾರತ ಮಾತ್ರವಲ್ಲದೆ ಜಗತ್ತು ಎದುರು ನೋಡುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು ಈ ಸಂದರ್ಭದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ವಿಶೇಷ ಸಂದೇಶವನ್ನು ನೀಡಿದ್ದಾರೆ.

ರಾಮಮಂದಿರ ನಿರ್ಮಾಣವು ಕೋಟಿ ಕೋಟಿ ರಾಮಭಕ್ತರ ನಂಬಿಕೆ ಮತ್ತು ತ್ಯಾಗದ ಆಚರಣೆಯಾಗಿದೆ, ಲೋಕಸಭಾ ಚುನಾವಣೆಯೂ ಅನತಿ ದೂರದಲ್ಲಿ ಇರುವುದರಿಂದ ಎಲ್ಲ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಹಾಜರಿರಬೇಕು, ಯಾರು ಯಾವುದೇ ವಿವಾದಾತ್ಮಕ ಹೇಳಿಕೆಗಳು ನೀಡದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ತಮ್ಮ ಸಹೋದ್ಯೋಗಿಗಳಿಗೆ ಹೇಳಿದ್ದಾರೆ.

ಪ್ರತಿಪಕ್ಷಗಳ ಹೇಳಿಕೆಗಳಿಂದ ಯಾರೂ ಪ್ರಚೋದನೆಗೆ ಒಳಗಾಗಬಾರದು. ಅಂತಹ ಯಾವುದೇ ಗಿಮಿಕ್‍ಗೆ ಸಿಕ್ಕಿಹಾಕಿಕೊಳ್ಳಬೇಡಿ, ಬಹುನಿರೀಕ್ಷಿತ ಸಮಾರಂಭದ ಪೂರ್ವದಲ್ಲಿ ಕೋಮು ಘರ್ಷಣೆಗಳು ಭುಗಿಲೆದ್ದಿರುವ ಬಗ್ಗೆ ಹಲವಾರು ವಿರೋಧ ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಂತಹ ಹೇಳಿಕೆಗೆ ಪ್ರತಿಕ್ರಿಯಿಸಿಬೇಡಿ ಎಂದು ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ರಾಮ ಜನ್ಮಭೂಮಿ ಟ್ರಸ್ಟ್ ನ್ಯಾಸ್ ಗೋಪಾಲ್ ದಾಸ್ ಭಾಗಿಯಾಗಲಿದ್ದಾರೆ. ಇದಕ್ಕಾಗಿ ಅಯೋಧ್ಯೆ ಸಂಪೂರ್ಣವಾಗಿ ಸಿದ್ಧವಾಗುತ್ತಿದೆ.