ದಾವಣಗೆರೆ : ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸಮವಸ್ತ್ರ ಧರಿಸಿ ಬಸ್ ಚಾಲನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಡಿಪೋ ಮ್ಯಾನೇಜರ್ಗೆ ನೋಟೀಸ್ ಜಾರಿ ಮಾಡಲಾಗಿದೆ. ಹೊನ್ನಾಳಿಯ ಡಿಪೋ ಮ್ಯಾನೇಜರ್ ಮಹೇಶಪ್ಪ ಅವರಿಗೆ ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಟಿ.ಆರ್. ನವೀನ್ ಕುಮಾರ್ ಅವರು ಶಾಸಕರಿಗೆ ಯಾರ ಅನುಮತಿ ಪಡೆದು ಬಸ್ ಚಾಲನೆ ಮಾಡಲು ಅನುಮತಿ ನೀಡಲಾಗಿದೆ ಎಂದು ವಿವರಣೆ ನೀಡುವಂತೆ ನೋಟೀಸ್ ನಲ್ಲಿ ಪ್ರಶ್ನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಬಸ್ಗೆ ಚಾಲನೆ ನೀಡಿ ಬಳಿಕ ಸುಮಾರು 60ಕಿ.ಮೀ ದೂರ ಕೆ.ಎಸ್.ಆರ್.ಟಿ.ಸಿ ಬಸ್ ಚಾಲನೆ ಮಾಡಿದ್ದರು. ಅಲ್ಲದೇ ಈ ಕುರಿತು ತಮ್ಮ ಟ್ವಿಟರ್ನಲ್ಲಿ ಫೋಟೋ ಹಂಚಿಕೊಂಡಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಸಖತ್ ವೈರತ್ ಆಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಾರಿಗೆ ಇಲಾಖೆ ಡಿಪೋ ಮ್ಯಾನೇಜರ್ಗೆ ನೋಟಿಸ್ ನೀಡಿದೆ.










