ಬಳ್ಳಾರಿ: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್ಸಿ) ಬಾಣಂತಿಯರ ಸರಣಿ ಸಾವು ಘಟನೆ ಬಳಿಕವೂ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಜಿಲ್ಲಾಸ್ಪ್ರತ್ರೆಗಳಲ್ಲಿ ಬಾಣಂತಿಯರ ಸಾವಿನ ಪ್ರಕರಣ ಮುಂದುವರಿದಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ವೈಶಾಲಿ ಕೊಟಬಾಗಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವೈಶಾಲಿ ಅವರು ಶುಕ್ರವಾರ ಹೆರಿಗೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಹೆರಿಗೆ ವಾರ್ಡ್ನಲ್ಲಿ ದಾಖಲಾಗಿದ್ದರು. ಶನಿವಾರ ಬೆಳಗ್ಗೆ ಸಿಜೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಭಾನುವಾರ ಬೆಳಗ್ಗೆಯವರೆಗೂ ಹುಷಾರಾಗಿಯೇ ಇದ್ದರು. ಆದರೆ, ಇದ್ದಕ್ಕಿದ್ದಂತೆ ಎದೆನೋವು ಎಂದು ಹೇಳಲು ಶುರು ಮಾಡಿದ್ದರು. ಬೆಳಗ್ಗೆ 10.30ರ ವರೆಗೂ ಯಾವೊಬ್ಬ ವೈದ್ಯರೂ ಬರಲಿಲ್ಲ ಎಂದು ಮೃತ ವೈಶಾಲಿ ಅವರ ಅತ್ತೆ ಈರವ್ವ ದೂರಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಬಾರದು. ನಮಗೆ ವೈದ್ಯರ ಮೇಲೆ ನಂಬಿಕೆ ಇಲ್ಲ ಎಂದು ಕುಟುಂಬಸ್ಥರು ಆಗ್ರಹಿಸಿದರು. ಪತ್ನಿ ಸಾವಿನ ಸುದ್ದಿ ತಿಳಿದು ಈರಣ್ಣ ಕೊಟಬಾಗ್ ಅವರು ಆಘಾತಕ್ಕೊಳಗಾಗಿದ್ದಾರೆ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ ಆಸ್ಪತ್ರೆಯ ಸಮಸ್ಯೆ ಬಗೆಹರಿಸಿದ್ದರು ಎಂದು ಕೇಳದ್ದೆ. ಆದರೆ, ಆಸ್ಪತ್ರೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವೈದ್ಯರು ರೋಗಿಗಳಿಗೆ ಕ್ಯಾರೇ ಎನ್ನುತ್ತಿಲ್ಲ. ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ವೈದ್ಯರ ನಿರ್ಲಕ್ಷ್ಯದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆಂದು ಹೇಳಿದ್ದಾರೆ.










