ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ರಾಣಿ ಸೋನು ಶ್ರೀನಿವಾಸ ಗೌಡ ಅವರಿಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದಿದ್ದರು. ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು.
ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಿದ್ದರು. ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದಿದ್ದರು. ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ನಿನ್ನೆ ಬೆಂಗಳೂರಿಗೆ ತೆರಳಿದ್ದರು.










