ಹೆಣ್ಣು ಮಕ್ಕಳಿಗೆ ಪ್ರತಿ ಹಂತದಲ್ಲೂ ಸವಾಲುಗಳಿವೆ : ಎನ್.ಎಸ್.ಶೃತಿ.

99
firstsuddi

ಚಿಕ್ಕಮಗಳೂರು : ಹೆಣ್ಣು ಮಕ್ಕಳಿಗೆ ಪ್ರತಿ ಹಂತದಲ್ಲೂ ಸವಾಲುಗಳು ಇರುತ್ತವೆ. ಅವುಗಳನ್ನು ಎದುರಿಸಲು ಮಹಿಳೆಯರು ದೈಹಿಕವಾಗಿ ಮತ್ತು ಮಾನಸಿಕವಾಗಿ ತಮ್ಮನ್ನು ತಾವು ಹುರಿದುಂಬಿಸಿಕೊಂಡು ಮುನ್ನಡೆಯಬೇಕು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಎನ್.ಎಸ್.ಶೃತಿ ಹೇಳಿದರು.

ನಗರದ ಕಸ್ತೂರಿ ಬಾ ಸದನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನಿನ್ನೆ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ಕಾನೂನಿನ ಅರಿವಿದ್ದರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಮಹಿಳೆಯರು ತಮ್ಮ ಹಕ್ಕುಗಳನ್ನು ಚಲಾಯಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಮರ್ಪಕವಾಗಿ ಕಾನೂನು ಅರಿಯಬೇಕು. ಆಗ ಮಾತ್ರ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.

ಆಡಳಿತ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದರೆ ಸಾಮಾಜಿಕವಾಗಿ ಸದೃಢರಾಗಲು ಸಾಧ್ಯ. ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಬೇಕು. ಈ ಸಮಾಜದಲ್ಲಿ ಆರ್ಥಿಕತೆಗೆ ತಕ್ಕಂತೆ ಬೆಲೆ ಸಿಗುವುದರಿಂದ ಸ್ವಾವಲಂಬಿ ಬದುಕು ಕಟ್ಟಿಕೊಂಡು ಸುತ್ತಮುತ್ತಲಿನ ವಾತಾವರಣದಲ್ಲಿ ನಿಮ್ಮ ಸ್ವಾವಲಂಬಿ ಜೀವನ ಸ್ಫೂರ್ತಿಯಾಗಲಿ ಎಂದು ಆಶಿಸಿದರು.

ಮಹಿಳೆಯ ಸಾಮಥ್ರ್ಯ, ಸ್ವಾಭಿಮಾನ ಮತ್ತು ಸ್ವಾತಂತ್ರ್ಯವನ್ನು ಗೌರವಿಸುವ ಮತ್ತು ಅವಳನ್ನು ಗೌರವಯುತವಾಗಿ ನಡೆಸಿಕೊಳ್ಳುವುದು ನಾಗರೀಕ ಸಮಾಜದ ಮುಖ್ಯ ಗುಣವಾಗಬೇಕು. ಮಹಿಳೆಯರು ಸಂವಿಧಾನ ನೀಡಿರುವ ಹಕ್ಕುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಮಾತನಾಡಿ ಪ್ರತಿಯೊಂದು ಕೆಲಸವನ್ನೂ ನಿರ್ವಹಿಸುವ ಶಕ್ತಿ, ತಾಳ್ಮೆ, ಉತ್ಸಾಹ ಮಹಿಳೆಗಿದೆ. ಆದರೆ ಇದರ ಮಧ್ಯೆಯೂ ಕೌಟುಂಬಿಕ ದೌರ್ಜನ್ಯಕ್ಕೆ ಹಲವು ಮಂದಿ ಮಹಿಳೆಯರು ಬಲಿಯಾಗುತ್ತಿದ್ದು, ಅವರಿಗೆ ಧೈರ್ಯ ನೀಡಿ, ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಕಸ್ತೂರಿ ಬಾ ಸದನ ಕಾರ್ಯದರ್ಶಿ ಮೋಹಿನಿ ಸಿದ್ದೇಗೌಡ ಮಾತನಾಡಿ ಸಂಸ್ಥೆಯು ಸ್ಥಾಪನೆಯಾಗಿ 60 ವರ್ಷಗಳು ಕಳೆದಿದ್ದು ಇದುವರೆಗೂ ನೊಂದ ಹೆಣ್ಣುಮಕ್ಕಳಿಗೆ ಸಾಂತ್ವಾನಪಡಿಸುವ ಮೂಲಕ ಅವರಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ನಿರ್ವಹಿಸಿಕೊಂಡು ಬರಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸ್ತೂರಿ ಬಾ ಸದನ ಅಧ್ಯಕ್ಷೆ ಶ್ರೀಮತಿ ಯಮುನಾ ಚನ್ನಬಸಪ್ಪಶೆಟ್ಟಿ ಮಹಿಳೆ ಸಮಾಜದ ಶಕ್ತಿ ಹಾಗೂ ಕುಟುಂಬದ ಕಣ್ಣು. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಸಾಧನೆಯ ಛಾಪು ಮೂಡಿಸಿದ್ದಾಳೆ ಎಂದರು.

ಈ ಸಂದರ್ಭದಲ್ಲಿ ಕಸ್ತೂರಿ ಬಾ ಸದನ ಖಜಾಂಚಿ ಶ್ರೀಮತಿ ಜಯಶ್ರೀ ನಂಜರಾಜ್, ಸಹ ಕಾರ್ಯದರ್ಶಿ ರೀನಾ ಸುಜೇಂದ್ರ, ಜಯಮ್ಮ ಕೃಷ್ಣಮೂರ್ತಿ ಹಾಗೂ ಅನೇಕ ಮಹಿಳೆಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅರುಧಂತಿ ಪ್ರಾರ್ಥಿಸಿದರು. ಗೀತಾಚಂದ್ರಶೇಖರ್ ನಿರೂಪಿಸಿ ವಂದಿಸಿದರು.