ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ದೆಹಲಿಯ ಪಿಎಂಎಲ್ಎ ವಿಶೇಷ ನ್ಯಾಯಾಲಯ ಜಾಮೀನು ವಿಸ್ತರಣೆ ಮಾಡಿದೆ.
ನ್ಯಾ.ವಿಕಾಸ್ ಧುಲ್ ನ್ಯಾಯಪೀಠ ಈ ಆದೇಶ ನೀಡಿದೆ. ಸಾಕ್ಷ್ಯಗಳನ್ನು ತಿರುಚುವಂತಿಲ್ಲ, ದೇಶದಿಂದ ಹೊರಗೆ ಹೋಗದಂತೆಯೂ ಹಾಗೂ 1 ಲಕ್ಷ ರೂ. ಶ್ಯೂರಿಟಿ ಮೇಲೆ ಜಾಮೀನು ವಿಸ್ತರಿಸಲಾಗಿದೆ. ಪ್ರಕರಣದಲ್ಲಿ ಇತರ ಆರೋಪಿಗಳಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮ ಮತ್ತು ರಾಜೇಂದ್ರ ಅವರಿಗೂ ಷರತ್ತುಬದ್ಧ ಜಾಮೀನು ದೊರೆತಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಇತರೆ ಆರೋಪಿಗಳ ವಿರುದ್ಧ ದೂರು ದಾಖಲಿಸಿರುವ ಇಡಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಕೆ ಮಾಡಿತ್ತು. ಜಾರ್ಜ್ಶೀಟ್ ಸಲ್ಲಿಕೆ ಹಿನ್ನೆಲೆ ಹೈಕೋರ್ಟ್ನಿಂದ ಪಡೆದ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಾಗಿ ಪರಿವರ್ತಿಸಲು ಡಿ.ಕೆ. ಶಿವಕುಮಾರ್ ಮತ್ತು ಹೊಸದಾಗಿ ಜಾಮೀನು ನೀಡುವಂತೆ ಇತರೆ ಆರೋಪಿಗಳು ಕೋರ್ಟ್ಗೆ ಮನವಿ ಮಾಡಿದ್ದರು.










