ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದ್ದು, ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ವಿಜಯ್ ಕುಮಾರ್ ಪೊಲೀಸರಿಂದ ಗುಂಡೇಟು ತಿಂದ ರೌಡಿಶೀಟರ್. ಈ ಹಿಂದೆ 18ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದ ರೌಡಿಶೀಟರ್ ವಿಜಯ್ ಕುಮಾರ್ ಕಳೆದ ಒಂದು ವಾರದ ಹಿಂದೆ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದರು. ಹೊರಗೆ ಬರುತ್ತಿದ್ದಂತೆ ಮತ್ತೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದು, ಬಳಿಕ ಆರೋಪಿ ಬೆಂಗಳೂರಿನ ವೀರಭದ್ರೇಶ್ವರ ನಗರಕ್ಕೆ ಆಗಮಿಸುವ ಕುರಿತು ಮಾಹಿತಿ ತಿಳಿದ ಸಬ್ ಇನ್ಸ್ ಪೆಕ್ಟರ್ ವಿನಯ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪೊಲೀಸರು ಬಂಧಿಸುತ್ತಿದ್ದಂತೆ ಆರೋಪಿ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದು, ಈ ಹಿನ್ನೆಲೆ, ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










