ಅಮರಾವತಿ : ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿಗಳ ಬಗ್ಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ರಾಜ್ಯಕ್ಕೆ ಅಮರಾವತಿ ಒಂದೇ ರಾಜಧಾನಿ ಎಂದು ಘೋಷಿಸಿದ್ದಾರೆ. ಈ ಘೋಷಣೆಯೊಂದಿಗೆ ಮೂರು ರಾಜಧಾನಿ ಮಸೂದೆಯನ್ನು ಹಿಂಪಡೆದು ಹೈಕೋರ್ಟ್ ಗೆ ನಿರ್ಧಾರವನ್ನು ತಿಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಅಮರಾವತಿ ಶಾಸಕಾಂಗ ರಾಜಧಾನಿ, ವಿಶಾಖಪಟ್ಟಣಂ ಒಂದು ಕಾರ್ಯಕಾರಿ ಮತ್ತು ಕರ್ನೂಲ್ ನ್ಯಾಯಾಂಗ ರಾಜಧಾನಿ ಎಂದು ವೈಎಸ್ ಆರ್ ಸಿಪಿ ಸರ್ಕಾರವು ರಾಜ್ಯಕ್ಕೆ ಮೂರು ವಿಭಿನ್ನ ರಾಜಧಾನಿಗಳನ್ನು ಪ್ರಸ್ತಾಪಿಸಿತ್ತು. ಇದಕ್ಕೆ ಪ್ರತಿಪಕ್ಷಗಳು ಮತ್ತು ಅಮರಾವತಿ ರಾಜಧಾನಿಗಾಗಿ ಭೂಮಿ ನೀಡಿದ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ಹೊಂದುವುದರ ವಿರುದ್ಧ ರೈತರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಮಸೂದೆಗಳನ್ನು ಹಿಂಪಡೆದಿದೆ.
ಏತನ್ಮಧ್ಯೆ, ಆಂಧ್ರಪ್ರದೇಶದ ಬಿಜೆಪಿ ನಾಯಕ ವೈಎಸ್ ಚೌಧರಿ ಕಳೆದ ವಾರ ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿಯಾಗಿ ಘೋಷಿಸುವ ಬೇಡಿಕೆಯನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಹೇಳಿದ್ದರು.










