ಅಹಮದಾಬಾದ್ : ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370 ಮತ್ತು 37(ಎ) ರದ್ದು ಮಾಡುವ ಮೂಲಕ ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರೊಂದಿಗೆ ಹೋರಾಡಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಲ್ಲಿಸಿದ ನಿಜವಾದ ಗೌರವ ಎಂದು ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಅಹಮದಾಬಾದ್ನಲ್ಲಿ ನಡೆದ ಕ್ಷಿಪ್ರ ಕಾರ್ಯಾಚರಣೆ ಪಡೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಆರ್ಟಿಕಲ್ 370 ರದ್ದು ಮಾಡುವ ಮೂಲಕ ನಮ್ಮ ರಾಷ್ಟ್ರವನ್ನು ಬಲಬಡಿಸಿದ್ದಾರೆ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಈ ಹಿಂದೆ ಇದ್ದ ಯಾವ ಸರ್ಕಾರವು 370ನೇ ವಿಧಿಯನ್ನು ರದ್ದುಗೊಳಿಸುವ ಬಗ್ಗೆ ಯೋಚಿಸಿರಲಿಲ್ಲ. 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಭಯೋತ್ಪಾದಕರೊಂದಿಗೆ ಹೋರಾಡಿ ಹುತಾತ್ಮರಾದ ಯೋಧರಿಗೆ ಗೌರವ ನೀಡಿದ್ದೇವೆ. ನಾವು 370ನೇ ವಿಧಿಯನ್ನು ರದ್ದು ಮಾಡಿರುವುದರಿಂದ ಕಾಶ್ಮೀರ ಅಭಿವೃದ್ದಿಯ ಹಾದಿಯಲ್ಲಿ ಸಾಗಲಿದೆ ಎಂದರು.










