ಮಂಗಳೂರು : ದ.ಕ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂದಿಸಿದಂತೆ ಜಿಲ್ಲಾಡಳಿತ ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅವಶ್ಯಕವಾಗಿರುವುದರಿಂದ ರಾಜ್ಯ ಸರ್ಕಾರವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದಿನಿಂದ 20 ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಮುಂದಿನ ಆದೇಶದವರೆಗೆ ಕೊರೋನಾ ಕರ್ಫ್ಯೂ ಜಾರಿಗೊಳಿಸಿ ಆದೇಶಿಸಿದ್ದು, ಈ ಸಂದರ್ಭದಲ್ಲಿ ಕೆಳಕಂಡ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿ, ಉಳಿದಂತೆ ಎಲ್ಲಾ ಸೇವೆಗಳನ್ನು /ಸಂಚಾರಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹಎಲ್ಲಾ ಕಾರ್ಖಾನೆಗಳು/ಕಂಪನಿಗಳು /ಸಂಸ್ಥೆಗಳು ಯಥಾರೀತಿಯಲ್ಲಿಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.ಆದರೆ ಸಂಬಂಧಿಸಿದ ಕಾರ್ಮಿಕರು /ನೌಕರರು ಕರೋನ ಕರ್ಪ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು.
ದೂರಸಂಪರ್ಕ, ಅಂತರ್ಜಾಲ, ಸೇವಾ ಸಂಸ್ಥೆಗಳು, ಮಾಹಿತಿತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿಗಳು ರಾತ್ರಿ ಪಾಳಿಯಲ್ಲಿ ಅಧಿಕೃತ ಕಚೇರಿ ಗುರುತಿನ ಚೀಟಿ ಹೊಂದಿ ಸಂಚರಿಸಲು ಅನುಮತಿ ನೀಡಲಾಗಿದೆ.
ವೈದ್ಯಕೀಯ ಸೇವೆ ಮತ್ತು ತುರ್ತುಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.
ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು.
ಮೇಲಿನ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ವಿಪತ್ತು ನಿರ್ವಹಣಾಕಾಯ್ದೆ 2005 , ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.










