ಮೈಸೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ದಾಳಿ, ದಾಖಲೆಗಳ ಪರಿಶೀಲನೆ ಮುಂದುವರಿದ ಕಾರಣ ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ. ಸದ್ಯ ಮುಡಾ ಅಧಿಕಾರಿಗಳು ಇಡಿ ತನಿಖೆಗೆ ಸಹಕರಿಸುತ್ತಿರುವ ಕಾರಣ ದೈನಂದಿನ ಕಾರ್ಯಚಟುವಟಿಕೆಗಳು ನಡೆಯುತ್ತಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ, ಮೈಸೂರಿನ ಮುಡಾ ಕಚೇರಿಗೆ ಆಗಮಿಸಿದ ನಾಲ್ವರು ಇಡಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಇದೇ ವೇಳೆ, ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಕಚೇರಿಗೆ ಆಗಮಿಸಿದರು. ಯಾವುದೇ ಪ್ರತಿಕ್ರಿಯೆ ನೀಡದೆ ಕಚೇರಿಗೆ ತೆರಳಿದರು. ಮುಡಾ ಹಗರಣ ಸಂಬಂಧ ಶುಕ್ರವಾರ ಮೈಸೂರಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಾಕಷ್ಟು ಮಾಹಿತಿ ಕಲೆ ಹಾಕಿದ್ದರು. ಶುಕ್ರವಾರ ರಾತ್ರಿ 10 ಗಂಟೆಗೆ ವಿಚಾರಣೆ ಮುಗಿಸಿ ತೆರಳಿದ್ದ ಇಡಿ ಅಧಿಕಾರಿಗಳು ಶನಿವಾರ ಬೆಳಗ್ಗೆ 10 ಗಂಟೆಗೆ ಮತ್ತೆ ಆಗಮಿಸಿದ್ದಾರೆ.










