ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಗೌರವಾನ್ವಿತ ನ್ಯಾಯಮೂರ್ತಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪಿ.ಎಸ್ ದಿನೇಶ್ ಕುಮಾರ್ ಅವರು ಫೆಬ್ರವರಿ 25, 1962 ರಂದು ಜನಿಸಿದರು. ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜು ಮತ್ತು ಬಿಎಂಎಸ್ ಕಾಲೇಜು ವಿದ್ಯಾರ್ಥಿ. ಜನವರಿ 2, 2015 ರಂದು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು ಡಿಸೆಂಬರ್ 30, 2016 ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು.
ಇತ್ತೀಚಿನ ವರ್ಷಗಳನ್ನು ಗಮನಿಸಿದರೆ, ಅತಿ ಕಡಿಮೆ ಅವಧಿಗೆ ಮುಖ್ಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸಿದ ಜಸ್ಟೀಸ್ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಅವರಾಗಿದ್ದಾರೆ. ಜೊತೆಗೆ, ಪ್ರಾಮಾಣಿಕತೆ ಮೂಲಕವೇ ಗಮನ ಸೆಳೆದಿದ್ದಾರೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ವರಾಳೆ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ ದಿನೇಶ್ ಕುಮಾರ್ ಅವರನ್ನು ಹಂಗಾಮಿ ಸಿಜೆ ಆಗಿ ನೇಮಕ ಮಾಡಿತ್ತು. ಇದೀಗ ಕೊಲಿಜಿಯಂ ಶಿಫಾರಸಿನಂತೆ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿತ್ತು.










