ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸೂ ಹಾಕಲ್ಲ: ಡಿಕೆಶಿ.

8
firstsuddi

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸೂ ಹಾಕಲ್ಲ. ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ವೈಯಕ್ತಿಕ. ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿತ್ರಾರ್ಜಿತ ಆಸ್ತಿಯಲ್ಲಿ ಶೇ.50 ಸರ್ಕಾರ ಪಡೆಯಬೇಕು ಎಂಬ ಪಿತ್ರೋಡಾ ಹೇಳಿಕೆ ಕುರಿತ ಪ್ರಶ್ನೆಗೆ, ಜೈರಾಮ್ ರಮೇಶ್ ಅವರು ನಮ್ಮ ಪಕ್ಷದ ಪರವಾಗಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಡೆತ್ ಟ್ಯಾಕ್ಸ್, ಬರ್ತ್ ಟ್ಯಾಕ್ಸ್ ಇಲ್ಲ. ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ ಎಂದು ಹೇಳಿದರು.

ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನವಾಗಿಲ್ಲ. ಅದು ಸುಳ್ಳು. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ. ನಮ್ಮ ದೇಶದ ರಾಜಕಾರಣದಲ್ಲಿ ತಂದೆ ಹಾಗೂ ಪೂರ್ವಜರ ಹೆಸರಿನಲ್ಲೇ ಚುನಾವಣೆ ಮಾಡುತ್ತಿರುವಾಗ ಅವರ ಆಸ್ತಿ ವರ್ಗಾವಣೆಗೆ ಅವಕಾಶ ನೀಡುತ್ತಾರಾ? ದೇಶದ ಸಂಪತ್ತನ್ನು ನಗದೀಕರಣ ಮಾಡಲು ಬಿಜೆಪಿ ಮುಂದಾಗಿದೆ ಎಂಬ ಮಾಧ್ಯಮ ವರದಿ ಓದಿದ್ದ ನೆನಪು ನನಗೆ. ನಮ್ಮ ಪ್ರಣಾಳಿಕೆಯಲ್ಲಿರುವ ಅಂಶಗಳು ಮಾತ್ರ ಪಕ್ಷದ ನಿಲುವು. ಅದರಿಂದ ಆಚೆಗಿನ ಅಂಶಗಳಿಗೂ ಪಕ್ಷಕ್ಕೂ ಸಂಬಂಧವಿಲ್ಲ. ಪಿತ್ರೋಡಾ ಅವರದು ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯ ಅಲ್ಲ. ಇಂತಹ ಚರ್ಚೆ ಪಕ್ಷದಲ್ಲಿ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು.