ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಜನಸಾಮಾನ್ಯರಿಗೆ ರಕ್ಷಣೆ ಇಲ್ಲ, ಅಧಿಕಾರಿ ಹತ್ಯೆಗೆ ಸರ್ಕಾರದ ವೈಫಲ್ಯವೇ ಕಾರಣ: ಹೆಚ್‌ಡಿಕೆ.

41
firstsuddi

ರಾಮನಗರ: ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಜನಸಾಮಾನ್ಯರಿಗೆ ರಕ್ಷಣೆ ಇಲ್ಲ. ರಾಜ್ಯದ ಹಿರಿಯ ಅಧಿಕಾರಿಯನ್ನು ಮನೆಗೆ ನುಗ್ಗಿ ಹತ್ಯೆ ಮಾಡಿದ್ದಾರೆ ಅಂದರೆ ಇವರ ಉದ್ಧಟತನ ಎಷ್ಟಿದೆ ಅಂತ ಗೊತ್ತಾಗುತ್ತಿದೆ. ಈ ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಹತ್ಯೆ ವಿಚಾರದ ಕುರಿತು ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಇಂತಹ ವಾತಾವರಣ ನಿರ್ಮಾಣ ಆದರೆ ಯಾವ ಅಧಿಕಾರಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯ? ಸಮಾಜಘಾತುಕ ಶಕ್ತಿಗಳಿಗೆ ಯಾವುದೇ ಲಂಗುಲಗಾಮು ಇಲ್ಲದಂತಾಗಿದೆ. ಇದರಲ್ಲಿ ಗೃಹ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ಯಾವ ಯಾವ ಭಾಗದಲ್ಲಿ ಏನೇನು ನಡೆಯುತ್ತದೆ ಎಂದು ಪೊಲೀಸ್ ಇಲಾಖೆಗೆ ಮಾಹಿತಿ ಇರುತ್ತದೆ. ಆದರೂ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರವೇ ವರ್ಗಾವಣೆ ಮಾಡಿ ಹಣ ವಸೂಲಿ ಮಾಡುತ್ತಾ ನಿಂತಿದ್ದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರಾ? ಸರ್ಕಾರದ ನಡೆಯಿಂದಲೇ ಇಂತಹ ಘಟನೆ ಜರುಗುತ್ತಿದೆ. ಸರ್ಕಾರ ಈ ಘಟನೆ ಬಗ್ಗೆ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.