ಕೊಯಂಬತ್ತೂರು : ಕಾನೂನುಬಾಹಿರ ಸಭೆ ನಡೆಸಿದ ಕಾರಣದಿಂದ ಮೂರು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಹಾಗೂ ಕೆಲವು ಕಾರ್ಯಕರ್ತರ ವಿರುದ್ಧ ಕೊಯಂಬತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಯಂಬತ್ತೂರಿನ ವಿ.ಕೆ.ಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಭೇಟಿ ನೀಡಿದ ಅಣ್ಣಾಮಲೈ ಅವರನ್ನು ಪಕ್ಷದ ಕಾರ್ಯಕರ್ತರು ಅದ್ದೂರಿಯಿಂದ ಸ್ವಾಗತಿಸಿದರು. ಆದರೆ, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹೇರಿದ್ದ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಪಕ್ಷದ ಕಚೇರಿಯಲ್ಲಿ ಬಹಳಷ್ಟು ಕಾರ್ಯಕರ್ತರು ಸೇರಿರುವುದು ಕಂಡುಬಂದಿತ್ತು.
ಅಲ್ಲದೇ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಕೆ. ಅಣ್ಣಾಮಲೈ ಅವರು ವಾಹನವೊಂದರಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು. ಇದರ ಆಧಾರದ ಮೇಲೆ ಸಬ್ ಇನ್ಸ್ಪೆಕ್ಷಟರ್ ಸುಗನ್ಯಾ ಅವರು ನೀಡಿದ ದೂರಿನ ಆಧಾರದ ಮೇಲೆ ಕತ್ತೂರು ಪೊಲೀಸರು ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್, ಬಿಜೆಪಿ ರಾಜ್ಯ ಮಟ್ಟದ ನಾಯಕರಾದ ಜಿಕೆಎಸ್ ಸೆಲ್ವಕುಮಾರ್, ಎಸ್.ಆರ್. ಸೇಕರ್ ಮತ್ತು ಕನಗಸಬತಿ ಮತ್ತು ಇತರ ಕೆಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೆ. ಅಣ್ಣಾಮಲೈ ಹಾಗೂ ಇತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 269, 270, 285, 341 ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.










