ಕಲಬುರಗಿ : ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್ ಜಾಧವ್ ಅವರು ಚಿಂಚೋಳಿ ಉಪಚುನಾವಣೆಯ ಟಿಕೆಟ್ನ್ನು ನನ್ನ ಸಹೋದರ ರಾಮಚಂದ್ರ ಜಾಧವ್ ಅವರಿಗೆ ನೀಡುವ ವಿಚಾರ ಪ್ರಸ್ತಾಪವಾಗಿತ್ತು. ಆದರೆ ಅನಾರೋಗ್ಯದ ಕಾರಣದಿಂದಾಗಿ ಅವರು ಟಿಕೆಟ್ ನಿರಾಕರಿಸಿದ್ದಾರೆ. ಇದರಿಂದ ನನ್ನ ಮಗ ಅವಿನಾಶ ಜಾಧವ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಇದರಿಂದ ನಮ್ಮ ಕುಟುಂಬದಲ್ಲಿ ಯಾವುದೇ ತೊಂದರೆ ಇಲ್ಲ. ನಮ್ಮದು ರಾಜಕೀಯ ಕುಟುಂಬ ಹೀಗಾಗಿ ಜನರ ಒತ್ತಾಯದ ಮೇರೆಗೆ ನನ್ನ ಪುತ್ರನನ್ನು ಕಣಕ್ಕಿಳಿಸುತ್ತಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ನ್ಯಾಯ ಕಾಪಾಡಿಲ್ಲ ಎಂದು ಹೇಳಿದ್ದೆ. ಆದರೆ ನಾನು ಕುಟುಂಬ ರಾಜಕಾರಣಕ್ಕೆ ಎಂದಿಗೂ ವಿರೋಧ ವ್ಯಕ್ತಪಡಿಸಿಲ್ಲ. ಎಲ್ಲ ಅಧಿಕಾರವನ್ನು ತಮ್ಮ ಬಳಿಯೇ ಇಟ್ಟುಕೊಂಡಿರುವುದನ್ನು ವಿರೋಧಿಸಿದ್ದೇನೆ ಎಂದು ಹೇಳಿದ್ದಾರೆ.










