ಮಂಗಳೂರು : ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯನ್ನು ರಿಪೇರಿ ಮಾಡುತ್ತಿದ್ದವರಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿಯಲ್ಲಿ ನಡೆದಿದೆ.
ಆಂಧ್ರ ಪ್ರದೇಶ ಮೂಲದ ಲಾರಿಯೊಂದು ಬೆದ್ರೋಡಿ ಬಸ್ ನಿಲ್ದಾಣದ ಬಳಿ ಕೆಟ್ಟು ನಿಂತಿದ್ದು, ಇದರ ದುರಸ್ತಿ ಕೆಲಸ ನಡೆಯುತ್ತಿತ್ತು. ಈ ವೇಳೆ ಅತಿ ವೇಗವಾಗಿ ಬಂದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಗುದ್ದಿ, ಬಳಿಕ ವಾಹನ ದುರಸ್ತಿಯಲ್ಲಿ ನಿರತರಾಗಿದ್ದ ಮೂವರು ಮೆಕ್ಯಾನಿಕ್ ಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮೂವರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದ್ದು, ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










