ಅಂಕೋಲಾ: ಕೇಂದ್ರ ಆಯುಷ್ ಇಲಾಖೆ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ರವರ ಕಾರು ಪಲ್ಟಿಯಾಗಿ ಸಚಿವರ ಪತ್ನಿ ಹಾಗೂ ಆಪ್ತ ಕಾರ್ಯದರ್ಶಿ ಮೃತರಾದ ಘಟನೆ ಅಂಕೋಲಾ ತಾಲೂಕಿನ ಹೊಸಕಂಬಿ ಬಳಿ ನಿನ್ನೆ ರಾತ್ರಿ ಸಂಭವಿಸಿದ್ದು, ಸಚಿವರು ಗಂಭೀರ ಗಾಯಗೊಂಡಿದ್ದಾರೆ.
ಸಚಿವರು ತನ್ನ ಪತ್ನಿ, ಚಾಲಕ ಸೇರಿ ನಾಲ್ವರ ಜೊತೆ ಕಾರಿನಲ್ಲಿ ಗೋವಾದಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಪರಿಣಾಮ ಸಚಿವರ ಪತ್ನಿ ವಿಜಯಾ ಶ್ರೀಪಾದ್ ನಾಯಕ್ ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ದೀಪಕ ರಾಮದಾದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಶ್ರೀಪಾದ್ ನಾಯಕ್ ರವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಅಂಕೋಲಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಖಾತೆ ಸಚಿವ ಶ್ರೀಪಾದ ನಾಯಕ್ ಅವರ ಪತ್ನಿ ಶ್ರೀಮತಿ ವಿಜಯಾ ನಾಯಕ್ ಅವರು ನಿಧನ ಹೊಂದಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಶ್ರೀಮತಿ ವಿಜಯಾ ನಾಯಕ್ ಅವರ ನಿಧನ ಅತ್ಯಂತ ದುರದೃಷ್ಟಕರ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಈ ಆಘಾತವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಗಾಯಗೊಂಡಿರುವ ಸಚಿವ ಶ್ರೀ ನಾಯಕ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದ್ದಾರೆ. ಸಚಿವರಿಗೆ ಎಲ್ಲ ಅಗತ್ಯ ನೆರವು ನೀಡುವ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.










