ಮಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮೂಡಬಿದಿರೆಯ ಶಿಕ್ಷಕಿ ಪದ್ಮಾಕ್ಷಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಹಿಂದೆ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾಗಮ ಯೋಜನೆಯಿಂದಾಗಿ ತಯಿಗೆ ಕೊರೊನಾ ಸೋಂಕು ತಗುಲಿದೆ ಎಂದು ಶಿಕ್ಷಕಿ ಪದ್ಮಾಕ್ಷಿ ಅವರ ಪುತ್ರಿ ಐಶ್ವರ್ಯ ತನ್ನ ಫೇಸ್ಬುಕ್ ಖಾತೆಯಲ್ಲಿ ಸಚಿವರಿಗೆ ಪತ್ರ ಬರೆಯುವ ಮೂಲಕ ತನ್ನ ಅಳಲನ್ನು ತೋಡಿಕೊಂಡಿದ್ದರು. ಯುವತಿಯ ಪತ್ರವನ್ನು ಗಮನಿಸಿದಿ ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕ್ಷಕಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಹೆಚ್ಚಿ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಅ.13ರಂದು ಶಿಕ್ಷಕಿಯ ಕೊರೊನಾ ವರದಿ ನೆಗೆಟಿವ್ ಬಂದಿತ್ತು. ಆದರೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.










