ನವದೆಹಲಿ : ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂಬ ಹೇಳಿಕೆ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬೋಪಾಲ್ ಸಂಸದೆ ಸಾಧ್ವಿ ಪಗ್ಯಾ ಸಿಂಗ್ ಠಾಕೂರ್ ಅವರು ಲೋಕಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. ದೇಶಕ್ಕಾಗಿ ಮಹಾತ್ಮ ಗಾಂಧಿ ನೀಡಿದ ಕೊಡುಗೆಯನ್ನು ನಾನು ಗೌರವಿಸುತ್ತೇನೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದರು. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಟ್ವೀಟ್ ವಿಚಾರವಾಗಿ ಪ್ರತಿಕ್ರಯಿಸಿದ ಅವರು, ಗೋಡ್ಸೆ ಅವರ ಬಗ್ಗೆ ನಾನು ನೀಡಿದ್ದ ಹೇಳಿಕೆಯನ್ನು ತಿರುಚಲಾಗಿದೆ. ಸಂಸತ್ತಿನ ಸದಸ್ಯೆಯಾಗಿರುವ ನನ್ನನ್ನು ಭಯೋತ್ಪಾದಕಿ ಎಂದು ಉಲ್ಲೇಖಿಸಿದ್ದನ್ನು ನಾನು ಆಕ್ಷೇಪಿಸುತ್ತೇನೆ ಎಂದರು. ಬುಧವಾರ ನಡೆದ ಲೋಕಸಭಾ ಅಧಿವೇಶನದಲ್ಲಿ ಸಾಧ್ವಿ ಪ್ರಗ್ಯಾ ಸಿಂಗ್ ಅವರು ನಾಥೂರಾಮ್ ಗೋಡ್ಸೆ ಒಬ್ಬ ದೇಶಭಕ್ತ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧವು ವ್ಯಕ್ತವಾಗಿತ್ತು. ಅಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡುವ ಮೂಲಕ ಪ್ರಗ್ಯಾ ಸಿಂಗ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.










