ಉತ್ತರಪ್ರದೇಶ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಯೋಧ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಯೋಧ ಸಂದೀಪ್ ಯಾದವ್, ಪಪ್ಪು ಯಾದವ್, ರಾಹುಲ್ ಯಾದವ್, ಅಖಿಲೇಶ್ ಯಾದವ್, ಸಂದೀಪ್ ಯಾದವ್ ಎಂದು ಗುರುತಿಸಲಾಗಿದೆ. ಮೃತರು ತಮ್ಮ ಸಂಬಂಧಿಕರ ಮದುವೆ ಸಮಾರಂಭವನ್ನು ಮುಗಿಸಿಕೊಂಡು ಕುಂದನ್ ಪುರದಿಂದ ವಾಪಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.










