ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮಹಿಳೆ ಮೇಲೆ ಹುಲಿ ದಾಳಿ ಮಾಡಿರುವಂತಹ ಘಟನೆ ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನ ಪಂಡರವಳ್ಳಿಯ ಕಾಫಿ ತೋಟದಲ್ಲಿ ನಡೆದಿದೆ.
ಕಾಫಿ ತೋಟದಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಹುಲಿ ದಾಳಿ ಮಾಡಿದ್ದು, ಮಹಿಳೆಯ ಮುಖ ಹಾಗೂ ಹಣೆಯ ಮೇಲೆ ಗಂಭೀರ ಗಾಯಗಳಾಗಿವೆ.
ಕಾಫಿ ತೊಟದಲ್ಲಿದ್ದ ಇತರೆ ಕಾರ್ಮಿಕರು ಕೂಗಾಡುತ್ತಿದ್ದಂತೆಯೇ ಹುಲಿ ಓಡಿಹೋಗಿದೆ. ಹುಲಿ ಹೋಗುತ್ತಿದ್ದಂತೆಯೇ ಕಾರ್ಮಿಕರು ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಲಿ ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.
ಕಳೆದ ಐದಾರು ವರ್ಷಗಳ ಹಿಂದೆ ಇದೇ ಪಂಡರವಳ್ಳಿಯಲ್ಲಿ ಹುಲಿ ದಾಳಿಗೆ ಓರ್ವ ಮಹಿಳೆ ಬಲಿಯಾಗಿದ್ದರು. ಇದೀಗ ಮತ್ತೆ ಹುಲಿ ದಾಳಿ ಮಾಡಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.










