ಮೈಸೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯವು ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ. ಆರೋಪ ಸಾಬೀತಾಗಿದ್ದರಿಂದ ಕೋರ್ಟ್ ಶಿಕ್ಷೆ ವಿಧಿಸಿದೆ. ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ 1.75 ಲಕ್ಷ ರೂ. ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಮೂರನೇ ಜೆಎಂಎಫ್ಸಿ ನ್ಯಾಯಾಲಯವು, ಸ್ನೇಹಮಯಿ ಕೃಷ್ಣ ಅವರಿಗೆ ಶಿಕ್ಷೆ ವಿಧಿಸಿದೆ.










