ಜೈಪುರ: ಮಹಾರಾಷ್ಟ್ರದ ಪಾಲ್ಘರ್ ರೈಲ್ವೆ ನಿಲ್ದಾಣದ ಬಳಿ ಸಂಚರಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್ಪ್ರೆಸ್ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ(ಆರ್ಪಿಎಫ್) ಪೇದೆ ಗುಂಡು ಹಾರಿಸಿದ್ದು, ಪರಿಣಾಮ ಆರ್ಪಿಎಫ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.
ಪೇದೆ ಚೇತನ್ ಸಿಂಗ್ ಗುಂಡು ಹಾರಿಸಿದ ಆರೋಪಿ. ಮೃತ ಆರ್ಪಿಎಫ್ ಎಎಸ್ಐ ಅವರನ್ನು ಟಿಕಾ ರಾಮ್ ಮೀನಾ ಎಂದು ಗುರುತಿಸಲಾಗಿದೆ.
ಬೆಳಗ್ಗಿನ ಜಾವ 5 ಗಂಟೆಯ ಸುಮಾರಿಗೆ ಜೈಪುರದಿಂದ ಮುಂಬೈಗೆ ರೈಲು ಚಲಿಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಪೇದೆ, ಸಬ್ ಇನ್ಸ್ ಪೆಕ್ಟರ್ ಜೊತೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾನೆ. ಈ ವೇಳೆ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ಅವರಿಬ್ಬರ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೇದೆ ಕೋಪಗೊಂಡು ಆರ್ಪಿಎಫ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ವರದಿಗಳು ತಿಳಿಸಿವೆ.
ಘಟನೆಯ ಬಳಿಕ ರೈಲಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.










