ಕಲಬುರಗಿ : ತನ್ನಿಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಬಳಿಕ ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಪಂಚಶೀಲ ನಗರದಲ್ಲಿ ನಡೆದಿದೆ. ತಾಯಿ ದೀಕ್ಷಾ (26) ಹಾಗೂ ಮಗಳು ಸಿಂಚನ (2) ಮೃತ ದುರ್ದೈವಿಗಳು. ಇನ್ನು 3 ವರ್ಷದ ಮಗ ಧನಂಜಯ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.
ನಿನ್ನೆ ಮಧ್ಯಾಹ್ನ ದೀಕ್ಷಾ ತನ್ನ ಇಬ್ಬರು ಮಕ್ಕಳೊಂದಿಗೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ವೇಳೆ ಮಕ್ಕಳು ತಪ್ಪಿಸಿಕೊಳ್ಳಲು ಯತ್ನಿಸಿದರೂ ಬಿಡದೇ ಆಟಿಕೆ ವಸ್ತುಗಳಿಗೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದಾಳೆ.
ಐದು ವರ್ಷಗಳ ಹಿಂದೆ ಕಾಳಗಿ ತಾಲೂಕಿನ ದೀಕ್ಷಾ ಅವರನ್ನು ಪಂಚಶೀಲ ನಗರದ ವಸಂತ ಶರ್ಮಾಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ, ದೀಕ್ಷಾಗೆ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಮತ್ತು ತವರು ಮನೆಗೆ ಕಳುಹಿಸುತ್ತಿರಲಿಲ್ಲ ಎನ್ನಲಾಗಿದೆ.
ಗಂಡನ ಮನೆಯವರೇ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ದೀಕ್ಷಾ ಕುಟುಂಬದವರು ಆರೋಪಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ. ಸ್ಪೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










