ಬೆಂಗಳೂರು : ತೆಲುಗು ಹಿನ್ನೆಲೆ ಗಾಯಕಿ ಹರಿಣಿ ಅವರ ತಂದೆಯ ಮೃತದೇಹ ರೈಲ್ವೆ ಟ್ರ್ಯಾಕ್ ನಲ್ಲಿ ಪತ್ತೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತೆಲಂಗಾಣ ಮೂಲದ ಎ.ಕೆ. ರಾವ್ ಹಲವು ದಿನಗಳಿಂದ ಕಣ್ಮರೆಯಾಗಿದ್ದರು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ನೀಡಿದ್ದರು. ನ.22ರಂದು ರಾತ್ರಿ ಯಲಹಂಕ- ರಾಜಾನುಕುಂಟೆ ರೈಲ್ವೆ ಹಳಿ ಮಧ್ಯೆ ಚಾಕುವಿನಿಂದ ಚುಚ್ಚಿಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಎ.ಕೆ.ರಾವ್ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ರಾವ್ ವಿರುದ್ಧ ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಕುಟುಂಬಸ್ಥರು ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.










