ಬೆಂಗಳೂರು : ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮೊದಲೇ ರಾಜ್ಯ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಮಾಜಿ ಸಚಿವ ರೋಷನ್ ಬೇಗ್ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರು ಸಚಿವ ಖಾತೆಗಳನ್ನು ಮಾರಾಟ ಮಾಡಿಕೊಂಡಿದ್ದಾರೆ. ಇದರಿಂದ ಕುಮಾರಸ್ವಾಮಿ ಅವರನ್ನು ದೂಷಿಸಲು ಆಗುವುದಿಲ್ಲ. ದಿನೇಶ್ ಗುಂಡೂರಾವ್ ಪ್ಲಾಫ್ ಷೋ ಇದ್ದ ಹಾಗೆ ಅವರಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಲಿ. ಸಿದ್ದರಾಮಯ್ಯ ಅವರಿಗೆ ಅಹಂಕಾರ ಮೊದಲ ದಿನದಿಂದ ನಾನೇ ಸಿಎಂ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ರಚನೆ ಮಾಡಲು ಕುಮಾರಸ್ವಾಮಿ ಅವರ ಮನೆ ಬಾಗಿಲಿಗೆ ಹೋದವರು ಸಿದ್ದರಾಮಯ್ಯ. ಕಳೆದ ಚುನಾವಣೆಯಲ್ಲಿ ಕಡಿಮೆ ಸ್ಥಾನ ಬರಲು ಸಿದ್ದರಾಮಯ್ಯ ಅವರೇ ಕಾರಣ ಎಂದು ಕಿಡಿಕಾರಿದ್ದಾರೆ.










