ದೆಹಲಿ ಪ್ರವಾಸದಲ್ಲಿ ಸಿಎಂ ಸಿದ್ದರಾಮಯ್ಯ: ಮುಡಾ ಪ್ರಕರಣ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ.

30

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿಮಿತ್ತ ಇಂದು ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣ ಕುರಿತು ಕಾಂಗ್ರೆಸ್‍ನ ನಾಯಕರುಗಳಾದ ಅಭಿಷೇಕ್ ಸಿಂಘ್ವಿ ಜೊತೆಗೆ ಮುಂದಿನ ಕಾನೂನು ಹೋರಾಟಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮುಡಾ ಪ್ರಕರಣ, ವಕ್ಫ್ ವಿವಾದ ಮತ್ತು ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈ ಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾತು ಕೇಳಿಬಂದಿದೆ. ಇಂದು ಬೆಳಗ್ಗೆ ಕೆಎಂಎಫ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿದ್ದರಾಮಯ್ಯ ಅವರು ಹೈ ಕಮಾಂಡ್ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಅವರನ್ನು ಸಿಎಂ ಭೇಟಿ ಮಾಡುವ ಸಾಧ್ಯತೆ ಇದೆ. ಮುಡಾ ಪ್ರಕರಣ ಸಂಬಂಧಿಸಿದಂತೆ ಇಡಿಯಿಂದ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ. ಹೀಗಾಗಿ ಒಂದು ವೇಳೆ ಇಡಿಯಿಂದ ನೋಟಿಸ್ ಜಾರಿಯಾದರೆ ಯಾವ ರೀತಿಯ ಕಾನೂನು ಹೋರಾಟ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ತಮಗೆ ಅಥವಾ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ಜಾರಿ ಮಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ, ಕಾನೂನು ತಜ್ಞರಿಂದ ಒಂದಷ್ಟು ಸಲಹೆ ಪಡೆಯುವ ಸಾಧ್ಯತೆ ಇದೆ.