ಬೆಂಗಳೂರು : ದೊಡ್ಡವರ ನ್ಯಾಯ ನನಗೆ ಬೇಡ, ನನ್ನ ಲೆವೆಲ್ನ ವಿಚಾರವಾಗಿ ಮಾತ್ರ ನಾನು ಮಾತನಾಡುತ್ತೇನೆ. ಇಲ್ಲಿನ ಜಂಜಾಟವೇ ಸಾಕಾಗಿದೆ ನನಗೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರದ ಬಗ್ಗೆ ಪ್ರತಿಕ್ರಯಿಸಿದ್ದು, ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಏನೆಲ್ಲಾ ಹೇಳಿಕೆ ನೀಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ದೊಡ್ಡವರ ನ್ಯಾಯದ ವಿಚಾರ ನನಗೆ ಬೇಡ. ನನ್ನ ಲೆವೆಲ್ನ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ಇಲ್ಲಿನ ಜಂಜಾಟವೇ ನನಗೆ ಸಾಕಾಗಿದೆ. ಆರೋಗ್ಯ ಸಮಸ್ಯೆಯನ್ನು ಮೊದಲು ಸರಿ ಮಾಡಿಕೊಳ್ಳಬೇಕಾಗಿದೆ. ಆದರೆ ನನಗೆ ಆಸ್ಪತ್ರೆಗೆ ಹೋಗುವುದಕ್ಕೂ ಆಗುತ್ತಿಲ್ಲ. ಏನು ಪಾಲಿಟಿಕ್ಸ್ ಆಗಿದೆಯೋ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದು, ಇದೇ ವೇಳೆ ಮೆಡಿಕಲ್ ಕಾಲೇಜು ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ್ದು, ಯಡಿಯೂರಪ್ಪ ಅವರಿಗೆ ನಿಜವಾದ ಸಂಗತಿ ಏನೆಂದು ಗೊತ್ತಿಲ್ಲ. ಗೊತ್ತಿದ್ದರೆ ಸ್ಥಳಾಂತರ ಮಾಡುತ್ತಿರಲಿಲ್ಲ. ನಾನು ಸುಧಾಕರ್ ವಿಚಾರದಲ್ಲಿ ಟೀಕೆ ಮಾಡುವುದಿಲ್ಲ. ಚಿಕ್ಕಬಳ್ಳಾಪುರಕ್ಕಲ್ಲ, ಬೇರೆ ನೂರು ಕಡೆ ಬೇಕಾದರೂ ಕೊಡಲಿ. ಆದರೆ ನಮಗೆ ಹಂಚಿಕೆಯಾಗಿದ್ದನ್ನು ಕಿತ್ತುಕೊಂಡಿದ್ದು ಸರಿಯಲ್ಲ. ನಾನು ಸಚವನಾಗಿದ್ದಾಗ ಒಂದು ಕೆಲಸವನ್ನೂ ಮಾಡಿಸಲು ಸಾಧ್ಯವಾಗಲಿಲ್ಲ. ಎಷ್ಟು ಕಷ್ಟಪಟ್ಟು ನಾನು ನನ್ನ ಕ್ಷೇತ್ರಕ್ಕೆ ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋಗಿದ್ದೆ. ಕಾವೇರಿ ನೀರಿನ ವಿಚಾರದಲ್ಲೂ ಹೀಗೆ ಆಗಿದ್ದು. ಮೇಕೆದಾಟು ಯೋಜನೆ ಜಾರಿಗೆ ಬಂದರೆ ಹೆಚ್ಚು ತೊಂದರೆ ಆಗುವುದು ನನ್ನ ಕ್ಷೇತ್ರಕ್ಕೆ. ಆದರೂ ನಾವು ಬೆಂಗಳೂರಿಗಾಗಿ ತ್ಯಾಗಕ್ಕೆ ಸಿದ್ಧರಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಬಾರದು. ಈ ಕುರಿತು ನಾನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯುತ್ತೇನೆ ಎಂದರು.










