ಕಲಘಟಗಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ನಡೆದಿದೆ. ಕಲಘಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಬಳಿಕ ಜನರಲ್ಲಿ ವಾಂತಿ ಹಾಗೂ ಅತಿಸಾರ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ 70 ಜನರಲ್ಲಿ 10 ಜನರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಹಾಗೂ 36 ಜನ ಕಲಘಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಔಷಧಿ ಪಡೆದುಕೊಂಡ ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಂಡಿದ್ದಾರೆ ಎಂದು ವರದಿ ತಿಳಿದು ಬಂದಿದೆ.
ಈ ಘಟನೆಗೆ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ನಿರ್ಲಕ್ಷವೇ ಕಾರಣ ಎಂದು ತಿಳಿದು ಧಾರವಾಡ ಜಿಲ್ಲಾಧಿಕಾರಿಯಾದ ದಿವ್ಯಾ ಪ್ರಭು ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಗನ್ನಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮಕ್ಕೆ ಭೇಟಿ ನೀಡಿದ ದಿವ್ಯಾ ಪ್ರಭು ಅವರು, ಗ್ರಾಮಕ್ಕೆ ಮೂರು ಬೋರ್ವೆಲ್ಗಳಿಂದ ನೀರು ಬರುತ್ತದೆ. ಇತ್ತೀಚೆಗೆ ಸುರಿದ ಹಿಂಗಾರು ಮಳೆಯಿಂದಾಗಿ ಹೊಸ ನೀರು ಕಲಘಟಗಿ ಕೆರೆಗಳಿಗೆ ಹರಿದುಹೋಗಿದೆ. ಇದೇ ಸಂದರ್ಭದಲ್ಲಿ ಕಲುಷಿತ ನೀರು ಕೂಡ ಬಂದಿರುವ ಸಾಧ್ಯತೆಯಿದೆ. ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಎಂದು ಹೇಳಿದ್ದಾರೆ










