ಬೆಂಗಳೂರು : ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯ ಅವರನ್ನು ಬೇಡಿದ್ದು ಯಾರು? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ಸ್ಥಾನ ಗೆದ್ದರೆ ಬಿಎಸ್ವೈ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್ ಜತೆ ಸೇರಲ್ಲ. ಅವರ ಜೊತೆ ಸೇರಿ ಅನುಭಿವಿಸಿದ್ದು ಸಾಕು ಎಂದಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ? ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು. ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ(?) ಕೊಟ್ಟವರು ಯಾರು? ಪಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸೆದಿದ್ದು ಯಾರು? ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು? ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ “ಯಾರು”ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ, ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ… ಎಂದು ಟ್ವೀಟ್ ಮಾಡಿದ್ದಾರೆ.










